ಬೆಳ್ತಂಗಡಿ: ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 2026ರ ಜುಲೈ 27ರಂದು ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ (Eco Sensitive Area) ಎಂದು ಘೋಷಿಸುವ ಸಂಬಂಧ ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.ಈ ಕರಡು ಅಧಿಸೂಚನೆಯಿಂದ ಬೆಳ್ತಂಗಡಿ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಗ್ರಾಮಗಳ ಜನರ ಭೂಮಿ, ಕೃಷಿ, ಮನೆ ನಿರ್ಮಾಣ, ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸ್ಥಳೀಯರ ಅಭಿಪ್ರಾಯ ಮತ್ತು ಆಕ್ಷೇಪಣೆಗಳು ಅತ್ಯಂತ ಮಹತ್ವದ್ದಾಗಿವೆ.

ರಾಜ್ಯ ಸರ್ಕಾರ ಈ ವಿಚಾರವನ್ನು ಕೇವಲ ಕೇಂದ್ರ ಸರ್ಕಾರದ ವಿಷಯ ಎಂದು ಕೈಕಟ್ಟಿ ಕುಳಿತುಕೊಳ್ಳದೆ, ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ದೃಢವಾದ ನಿಲುವು ತಾಳಬೇಕು. ರೈತರು, ಭೂಮಾಲೀಕರು ಹಾಗೂ ಗ್ರಾಮೀಣ ಜನರ ಬದುಕಿಗೆ ಧಕ್ಕೆಯಾಗುವ ಯಾವುದೇ ಅಂಶಗಳಿದ್ದರೆ ಅವುಗಳನ್ನು ಸ್ಪಷ್ಟವಾಗಿ ವಿರೋಧಿಸಿ, ಜನರ ಪರವಾಗಿ ಕೇಂದ್ರ ಸರ್ಕಾರದ ಮುಂದೆ ಬಲವಾದ ಆಕ್ಷೇಪಣೆ ಸಲ್ಲಿಸುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ.

ನಾನು ಈಗಾಗಲೇ ಸ್ಥಳೀಯರ ಹಕ್ಕುಗಳ ಪರವಾಗಿ ನಿರಂತರವಾಗಿ ಧ್ವನಿ ಎತ್ತಿದ್ದು, ಮುಂದೆಯೂ ಜನರ ಹಿತಾಸಕ್ತಿಗೆ ವಿರುದ್ಧವಾಗುವ ಯಾವುದೇ ಕ್ರಮವನ್ನು ವಿರೋಧಿಸುತ್ತೇನೆ. ಈ ವಿಷಯದಲ್ಲಿ ರಾಜ್ಯ ಸರ್ಕಾರವು ಕೂಡ ಪಕ್ಷಾತೀತವಾಗಿ ಜನರ ಪರವಾಗಿ ನಿಲ್ಲಬೇಕು ಹಾಗೂ ಕರಡು ಅಧಿಸೂಚನೆಯಲ್ಲಿರುವ ಜನವಿರೋಧಿ ಅಂಶಗಳನ್ನು ಕೈಬಿಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು.

ಆದ್ದರಿಂದ ಕರಡು ಅಧಿಸೂಚನೆಯ ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆಗಳು, ಸಲಹೆಗಳು ಹಾಗೂ ಅಭಿಪ್ರಾಯಗಳನ್ನು ಜುಲೈ 27 ರಿಂದ 60 ದಿನಗಳೊಳಗೆ ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ಸಲ್ಲಿಸುವಂತೆ ಮನವಿ ಮಾಡುತ್ತೇನೆ.

ವಿಳಾಸ :
ಕಾರ್ಯದರ್ಶಿಗಳು,
ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ,
ಇಂದಿರಾ ಪರಿಸರ ಭವನ, ಜೋರ್‌ಬಾಗ್, ನವದೆಹಲಿ – 110003.

ಇ-ಮೇಲ್: esz-mef@nic.in

ಪಶ್ಚಿಮ ಘಟ್ಟ ವ್ಯಾಪ್ತಿಯ ಜನರ ಭೂಮಿ, ಬದುಕು ಮತ್ತು ಹಕ್ಕುಗಳ ರಕ್ಷಣೆಗೆ ನಾನು ಸದಾ ಬದ್ಧನಾಗಿದ್ದು, ರಾಜ್ಯ ಸರ್ಕಾರವೂ ಜನರ ಪರವಾಗಿ ಕೇಂದ್ರ ಸರ್ಕಾರದ ಮೇಲೆ ಪರಿಣಾಮಕಾರಿ ಒತ್ತಡ ಹೇರಬೇಕು ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.


Discover more from Nammura Suddi

Subscribe to get the latest posts sent to your email.

Leave a Reply

Discover more from Nammura Suddi

Subscribe now to keep reading and get access to the full archive.

Continue reading